ಬೆಂಗಳೂರು. ಸೆ.6: ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು, ಆದ್ಯತೆಯ ಮೇರೆಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದರು.
ವಿಕಾಸಸೌಧದಲ್ಲಿಂದು ನಡೆದ ಹುಬ್ಬಳ್ಳಿ-ಧಾರವಾಡ ಬೈಪಾಸ್ ಮತ್ತು ಹುಬ್ಬಳ್ಳಿ ಧಾರವಾಡ ವೃತ್ತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು. ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಸೂಚಿಸಿದರು.
ರಾಜ್ಯದಲ್ಲಿ ಅತಿವೃಷ್ಠಿಯಿಂದ 8 ಸಾವಿರ ಕೋಟಿ ರೂ. ವೆಚ್ಚದ ರಸ್ತೆಗಳು ಹಾನಿಗೊಳಗಾಗಿವೆ. 2600ಕೋಟಿ ರೂ. ವೆಚ್ಚದ ಬಿಲ್ಲುಗಳ ಬಾಕಿ ಇವೆ. ಸಿಆರ್ಎಫ್ ಯೋಜನೆಯಡಿಯಲ್ಲೂ 600 ಕೋಟಿ ರೂ. ವೆಚ್ಚದ ಬಿಲ್ಲುಗಳು ಬಾಕಿ ಇವೆ. ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಮುದೋಳ್ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ನಗರ ಸಾರಿಗೆ ನಿರ್ದೇಶನಾಲಯದಿಂದ 5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ- ಧಾರವಾಡ ನಗರ ವ್ಯಾಪ್ತಿಯ 315 ಕೋಟಿ ರೂ. ವೆಚ್ಚದ ರೈಲುನಿಲ್ದಾಣ ದಿಂದ ವಿಮಾನ ನಿಲ್ದಾಣ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲ ಹಂತದಲ್ಲಿ ಅನುಷ್ಟಾನಗೊಳಿಸುತ್ತಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ, ಸಚಿವರಾದ ಶ್ರೀ ಜಗಧೀಶ್ ಶೆಟ್ಟರ್, ಶ್ರೀ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶ್ರೀ ರಜನೀಶ್ ಗೋಯಲ್ ಹಾಗು ಹಿರಿಯ ಅಭಿಯಂತರರು ಉಪಸ್ಥಿತರಿದ್ದರು.